ಚಿತ್ರದುರ್ಗ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಒಟ್ಟು 33 ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿಗಳನ್ನು ಮುಂದಿನ 8 ರಿಂದ 9 ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ ಮುಗಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು.
ನಗರದ ರೈಲ್ವೇ ನಿಲ್ದಾಣದ ಹತ್ತಿರದ ಲೆವೆಲ್ ಕ್ರಾಸಿಂಗ್ ಸಂಖ್ಯೆ 22ರ ಬದಲಾಗಿ ನಿರ್ಮಿಸಲಾಗುತ್ತಿರುವ ನೂತನ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಶೇ.100 ರೈಲ್ವೆ ವಿದ್ಯುದ್ದೀಕರಣ ಗುರಿ
ದೇಶಾದ್ಯಂತ ರೈಲ್ವೆ ವಿದ್ಯುದ್ದೀಕರಣ ಶೇ.99ರಷ್ಟು ಪೂರ್ಣಗೊಂಡಿದ್ದು, ಈ ವರ್ಷದ ಕೊನೆಯೊಳಗೆ ಶೇ.100ರಷ್ಟು ಸಾಧಿಸಿ ವಿಶ್ವ ದಾಖಲೆ ಬರೆಯಲಾಗುವುದು. ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ವಿದ್ಯುದ್ದೀಕರಣ ಕಾರ್ಯ 2 ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಡಿಸೆಂಬರ್ ವೇಳೆಗೆ ಕರ್ನಾಟಕ ಶೇ.100ರಷ್ಟು ರೈಲ್ವೆ ವಿದ್ಯುದ್ದೀಕರಣ ಸಾಧಿಸಿದ ರಾಜ್ಯವಾಗಲಿದೆ.
ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ರಾಜ್ಯದ ರೈಲ್ವೆ ಯೋಜನೆಗಳಿಗಾಗಿ ರೂ. 52,000 ಕೋಟಿಗೂ ಹೆಚ್ಚು ಅನುದಾನ ತರಲಾಗಿದೆ. ಹೊಸ ರೈಲ್ವೆ ಯೋಜನೆಗಳಿಗೆ ರೂ. 15,000 ಕೋಟಿ ನೀಡಲಾಗಿದ್ದು, ಗದಗ-ವಾಡಿ, ಗಿಣಿಗೆರಾ-ರಾಯಚೂರು, ಶಿವಮೊಗ್ಗ-ರಾಣೆಬೆನ್ನೂರು, ಕಡೂರು-ಚಿಕ್ಕಮಗಳೂರು-ಬೇಲೂರು ಹಾಗೂ ಆಲಮಟ್ಟಿ-ಯಾದಗಿರಿ ಮಾರ್ಗಗಳ ಕಾಮಗಾರಿ ಭರದಿಂದ ಸಾಗಿದೆ. ಚಿಕ್ಕಜಾಜೂರು-ಬಳ್ಳಾರಿ ಡಬ್ಲಿಂಗ್ ಯೋಜನೆಗೆ ರೂ. 3,340 ಕೋಟಿ ಮಂಜೂರಾಗಿದ್ದು, ರಾಜ್ಯದ 62 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ.
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗ
ಬಹುವರ್ಷಗಳ ಕನಸಿನ ಯೋಜನೆಯಾದ ತುಮಕೂರು – ಚಿತ್ರದುರ್ಗ – ದಾವಣಗೆರೆ ನೂತನ ನೇರ ರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಶೇ. 92 ರಷ್ಟು ಭೂಸ್ವಾಧೀನ ಪೂರ್ಣಗೊಂಡಿದೆ. ಬಾಕಿ ಇರುವ ಶೇ. 8 ರಷ್ಟು ಜಮೀನನ್ನು ಜಿಲ್ಲಾಡಳಿತ ಶೀಘ್ರವೇ ಹಸ್ತಾಂತರಿಸಿದರೆ, ಮುಂದಿನ ಒಂದೂವರೆ ವರ್ಷದಲ್ಲಿ ಯೋಜನೆ ಪೂರ್ಣಗೊಳ್ಳಲಿದೆ. ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ಚಿತ್ರದುರ್ಗ ಹಾಗೂ ಚಿಕ್ಕಜಾಜೂರು ನಿಲ್ದಾಣಗಳನ್ನು ನವೀಕರಿಸಲಾಗುತ್ತಿದ್ದು, ತುಮಕೂರು – ರಾಯದುರ್ಗ ಮಾರ್ಗವೂ ಸೇರಿದಂತೆ 2027ರ ಡಿಸೆಂಬರ್ ಅಂತ್ಯದ ವೇಳೆಗೆ ಕಾಮಗಾರಿಗಳು ಮುಕ್ತಾಯಗೊಳ್ಳಲಿವೆ.
“ಯಾವುದೇ ಕಾರಣಕ್ಕೂ ಮೇಲ್ಸೇತುವೆ ಕಾಮಗಾರಿಯ ಗುಣಮಟ್ಟದಲ್ಲಿ ರಾಜಿಯಾಗಬಾರದು. ಗುತ್ತಿಗೆದಾರರು ನಿಗದಿತ ಗುಣಮಟ್ಟ ಕಾಪಾಡಿಕೊಂಡು ಮುಂದಿನ ಒಂದೂವರೆ ವರ್ಷದ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು.”
— ವಿ. ಸೋಮಣ್ಣ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ
ಇದೇ ವೇಳೆ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಸಚಿವರು ತಿಳಿಸಿದರು.
ಸಂಸದ ಗೋವಿಂದ ಕಾರಜೋಳ ಹಾಗೂ ಶಾಸಕರ ಬೇಡಿಕೆ
ಸಂಸದ ಗೋವಿಂದ ಎಂ. ಕಾರಜೋಳ ಮಾತನಾಡಿ, ಚಿತ್ರದುರ್ಗ ಹಾಗೂ ಚಿಕ್ಕಜಾಜೂರು ಮೇಲ್ಸೇತುವೆಗಳಿಂದ 25-30 ವರ್ಷಗಳ ಸುದೀರ್ಘ ಸಂಚಾರ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ರಾಜ್ಯ ಸರ್ಕಾರ ಶೇ. 50ರಷ್ಟು ವೆಚ್ಚ ಹಂಚಿಕೆ ಮಾಡುವ ಯೋಜನೆಗಳು ವಿಳಂಬವಾಗುವುದನ್ನು ತಪ್ಪಿಸಲು ಈ ಯೋಜನೆಗೆ ಶೇ. 100ರಷ್ಟು ಹಣವನ್ನು ಕೇಂದ್ರ ಸರ್ಕಾರವೇ ಭರಿಸಿದೆ ಎಂದರು. ಜೊತೆಗೆ ಹೊಸದುರ್ಗದಲ್ಲಿ ವಿಶ್ವಮಾನವ ಹಾಗೂ ಚಾಲುಕ್ಯ ಎಕ್ಸ್ಪ್ರೆಸ್, ಹೊಳಲ್ಕೆರೆಯಲ್ಲಿ ಸಿದ್ಧಗಂಗಾ ಎಕ್ಸ್ಪ್ರೆಸ್ ಮತ್ತು ಚಿಕ್ಕಜಾಜೂರಿನಲ್ಲಿ ರಾಣಿ ಚನ್ನಮ್ಮ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಮನವಿ ಮಾಡಿದರು.
ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮಾತನಾಡಿ, ಈ ಹಿಂದೆ ನಿರ್ಮಿಸಲಾದ ಕೆಳಸೇತುವೆಗಳು ಕಳಪೆಯಾಗಿದ್ದು ಪದೇ ಪದೇ ದುರಸ್ತಿ ಕಾಣುತ್ತಿವೆ. ಆದ್ದರಿಂದ ನೂತನ ಕಾಮಗಾರಿಯಲ್ಲಿ ಯಾವುದೇ ಗುಣಮಟ್ಟದ ಲೋಪ ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜೀಪೀರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಮಾಜಿ ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ, ಎಸ್.ಕೆ. ಬಸವರಾಜನ್ ಹಾಗೂ ಹೆಚ್ಚುವರಿ ರೈಲ್ವೇ ವಿಭಾಗೀಯ ಅಧಿಕಾರಿ ಶಬ್ಬಾಸ್ ಅಹ್ಮದ್ ಉಪಸ್ಥಿತರಿದ್ದರು.
Leave a comment